ಬೆಂಗಳೂರು | ಸಚಿನ್ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ್ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಖಡಕ್ ಆಗಿ ಕೌಂಟರ್ ಕೊಟ್ಟಿದ್ದಾರೆ ಡಿಸಿಎಂ ಡಿ ಕೆ ಶಿವಕುಮಾರ್ (DK Shivakumar).
ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ..? ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆ ಇದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ. ಮಾತಾಡಲಿ ಬಿಡಿ ಎಂದು ಹೇಳಿದರು.
ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಮುತ್ತಿಗೆ ಹಾಕುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು. ಯಾಕೆ ನೀಡಲಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು..? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ ಎಂದರು.