ಬೆಂಗಳೂರು | ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ತರ 5 ಗ್ಯಾರಂಟಿಗಳಲ್ಲಿ ಒಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ. ಇದನ್ನು ಅತಿ ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಮಂಗಳವಾರ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಿಗಮದ ಪ್ರಯಾಣಿಕರ ಸಂಖ್ಯೆ, ಬಸ್ ಗಳ ಸಂಖ್ಯೆ, ವಾರ್ಷಿಕ ಆದಾಯದ ಸಮಗ್ರ ಮಾಹಿತಿಯನ್ನು ಪಡೆದು ಇದನ್ನು ಜಾರಿಗೊಳಿಸಲಾಗುತ್ತದೆ. ಇದರಲ್ಲಿ ಯಾವುದೇ ರೀತಿಯಾದಂತಹ ಅನುಮಾನ ಬೇಡ, ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ.
ಪ್ರತಿ ವರ್ಷ ಉಚಿತ ಬಸ್ ಸೇವೆ ವಿಚಾರವಾಗಿ ಅಂದಾಜು 3200 ಕೋಟಿ ಖರ್ಚಾಗುತ್ತದೆ. ಸಾರಿಗೆ ನಿಗಮ ಈಗಾಗಲೇ ನಷ್ಟದಲ್ಲಿದೆ. ಹೀಗಾಗಿ ಸರ್ಕಾರ ಸಹಾಯಧನ ನೀಡಿದರೆ ಈ ಯೋಜನೆಯನ್ನು ಜಾರಿಗೆ ತರಲು ಅನುಕೂಲವಾಗುತ್ತದೆ. ಮಾತ್ರವಲ್ಲದೆ ಕೊರೊನಾ ಸಾಂಕ್ರಾಮಿಕ ಸೋಕಿನ ಸಂದರ್ಭದಲ್ಲಿ ಉಂಟಾದ ನಷ್ಟವನ್ನು ಸರಿದೂಗಿಸಲು ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಈಗಾಗಲೇ ಸಾವಿರಾರು ಕೋಟಿ ರೂ ಹಣ ಹಲವು ನಿಗಮಗಳಿಂದ ಬರಬೇಕಿದೆ. ಒಟ್ಟಾರೆಯಾಗಿ ನೋಡುವುದಾದರೆ ಉಚಿತ ಬಸ್ ಸೇವೆ ಕಲ್ಪಿಸಿದರೆ ಆರ್ಥಿಕ ಹೊರೆ ಬೀಳಲಿದೆ ಎಂದು ಮನವರಿಗೆ ಮಾಡಿಕೊಟ್ಟಿದ್ದಾರೆ.
ಇನ್ನು ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಪ್ರಣಾಳಿಕೆಯಲ್ಲಿ ನಾವು ಹಾಗೆ ಹೇಳಿಲ್ಲ ಇದು ಎಲ್ಲರಿಗೂ ಅನ್ವಯವಾಗಲಿದೆ ಎಂದು ತಿಳಿಸಿದರು.
ನಾಲ್ಕು ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. ನಾಲ್ಕು ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ. 1,04,450 ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ 82 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ನಾಲ್ಕು ನಿಗಮಗಳಿಂದ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ ಇದೆ ಎಂದು ತಿಳಿಸಿದರು.
ಯಾವುದೇ ರೀತಿಯಾದಂತಹ ಹೊರೆ ಬೀಳದಂತೆ ಸಾಧಕ ಬಾದಕಗಳನ್ನು ಪರಿಶೀಲಿಸಿ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.